ಬಾಗಲಕೋಟೆ: ಇಲ್ಲಿನ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಶನಿವಾರ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರವೇರಿಸಿದರು.
ಕೋವಿಡ್ ಸಂಕಷ್ಟದ ಕಾರಣ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಸಹಭಾಗಿತ್ವ ಇಲ್ಲದೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಖಾಲಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಿತು.
ಸ್ವಾತಂತ್ರ್ಯೋತ್ಸವದ ನಿಮಿತ್ತ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರ ಬದಲಿಗೆ 40 ಮಂದಿ ಕೊರೊನಾ ವಾರಿಯರ್ಸ್ ಗಳನ್ನು ಗೌರವಿಸಲಾಯಿತು. ಇವರಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ, ಪೊಲೀಸರು, ವಿವಿಧ ಇಲಾಖೆ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಒಳಗೊಂಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ಆನಂದ ಹೊಸಮನಿ, ಮಹಾಲಿಂಗಪುರದ ಬಿ.ಸಿ.ಆಂಗ್ಲ ಮಾಧ್ಯಮ ಶಾಲೆಯ ರಚಿತಾ ಅನ್ವೇಕರ ಹಾಗೂ ಬಾಗಲಕೋಟೆ ವಿದ್ಯಾಗಿರಿ ಸೇಂಟ್ ಆಯನ್ಸ್ ಶಾಲೆಯ ರಾಜಶೇಖರ ರೆಡ್ಡಿ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಾಯಕ್ಕ ಮೇಟಿ, ಶಾಸಕ ವೀರಣ್ಣ ಚರಂತಿಮಠ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಸಿಇಒ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಉಪಸ್ಥಿತರಿದ್ದರು.
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News