ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಪುನರ್ಪರಿಶೀಲನಾ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಮ್ಮ ಮಕ್ಕಳಿಗೆ ₹295.415 ಕೋಟಿ(4ಕೋಟಿ ಡಾಲರ್) ವರ್ಗಾವಣೆ ಮಾಡಿದ ಪ್ರಕರಣದಲ್ಲಿ ವಿಜಯ ಮಲ್ಯ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು 2017ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪುನರ್ ಪರಿಶೀಲಿಸುವಂತೆ ಮಲ್ಯ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠವು ತೀರ್ಪು ಕಾಯ್ದಿರಿಸಿದ್ದಾರೆ.
ನ್ಯಾಯಾಲಯದ ಹಲವು ಆದೇಶಗಳನ್ನು ಉಲ್ಲಂಘಿಸಿ ಬ್ರಿಟಿಷ್ ಕಂಪನಿ ಡಿಯಾಗೆಯೊನಿಂದ ಪಡೆದಿದ್ದ ₹295.415 ಕೋಟಿ ಮೊತ್ತವನ್ನು ವಿಜಯ ಮಲ್ಯ ತಮ್ಮ ಮಕ್ಕಳಿಗೆ ವರ್ಗಾಯಿಸಿದ್ದಾರೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ನೇತೃತ್ವದ ಬ್ಯಾಂಕ್ಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಲ್ಯ ತಪ್ಪಿತಸ್ಥರು ಎಂದು 2017ರ ಮೇ 9ರಂದು ತೀರ್ಪು ನೀಡಿತ್ತು.